ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಗುರುವಾರ ಹಾಸನ ಚಲೋ ಬೃಹತ್ ಪ್ರತಿಭಟನೆಯನ್ನು ರಾಜ್ಯದ ನೂರಾರು ಸಂಘಟನೆ ಹಮ್ಮಿಕೊಂಡಿದೆ. ಪ್ರಗತಿಪರ ಹೋರಾಟಗಾರ ಕೆ.ಎಲ್. ಅಶೋಕ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಪೆನ್ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಹೊರ ದೇಶಕ್ಕೆ ಪರಾರಿಯಾಗಿದ್ದಾನೆ. ಒಂದು ತಿಂಗಳಾದರೂ ಅವರನ್ನು ಸರ್ಕಾರ ಬಂಧಿಸದೇ ಇರುವುದನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಾಸನ ಹಲವು ದುರಂತಗಳಿಗೆ ಸಾಕ್ಷಿಯಾಗುತ್ತಿದೆ.
ಇದನ್ನೂ ಓದಿ: ಭಾರತಕ್ಕೆ ಬರಲು ಪ್ರಜ್ವಲ್ ವಿಮಾನ ಟಿಕೆಟ್ ಬುಕ್
ಪ್ರಜ್ವಲ್ ರೇವಣ್ಣ ಅವರ ಕೃತ್ಯ ಖಂಡಿಸಲು ನಿಘಂಟಿನಲ್ಲಿ ಪದಗಳೇ ಸಿಗುವುದಿಲ್ಲ. ಅವರ ಕುಟುಂಬದ ಅಧಿಕಾರದ ಪಿತ್ತ ನೆತ್ತಿಗೇರಿದೆ. ದೌರ್ಜನ್ಯ, ಅತ್ಯಾಚಾರ, ಹಿಂಸೆ, ಶೋಷಣೆಗಳು ನಡೆಯುತ್ತಿವೆ. ನೂರಾರು ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಆತನನ್ನು ಬಂಧಿಸುವುದಷ್ಟೇ ಅಲ್ಲದೇ ಇಡೀ ಘಟನೆಯ ಸುತ್ತ ಯಾರೇ ಇದ್ದರೂ ಕೂಡ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.