Thursday, July 4, 2024

ವಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದೂಗಳ ಕ್ಷಮೆ ಕೇಳಬೇಕು: ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಹುಲ್ ಗಾಂಧಿಯವರು ಹಿಂದೂಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಮಾನ್ಯ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಈ ದೇಶವನ್ನು ಮುನ್ನಡೆಸುತ್ತಿದೆ. ಮತ್ತೊಂದು ಕಡೆ ಸತತ 3 ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಿ ಕಾಂಗ್ರೆಸ್ ಪಕ್ಷ, ಅದರ ನಾಯಕ ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ವಿಪಕ್ಷ ನಾಯಕನ ಸ್ಥಾನ ಜವಾಬ್ದಾರಿ ಅವರಿಗೆ ಮೊದಲ ಬಾರಿಗೆ ಲಭಿಸಿದೆ. ನಿನ್ನೆ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರು ವಿಪಕ್ಷ ನಾಯಕನಾಗಿ ಮಾಡಿದ ಚೊಚ್ಚಲ ಭಾಷಣ ಸುಳ್ಳು, ನಿರಾಶೆ, ಆಧಾರರಹಿತ ಆರೋಪಗಳಿಂದ ಕೂಡಿತ್ತು ಎಂದು ಆಕ್ಷೇಪಿಸಿದರು ಎಂದರು.

ಸದನದಲ್ಲಿ ರಾಹುಲ್ ಗಾಂಧಿಯವರ ನಡವಳಿಕೆ ಸಂಸತ್ತಿನ ನಿಯಮಗಳಿಗೆ ಧಕ್ಕೆ ತರುವಂತಿತ್ತು ಎಂದು ಟೀಕಿಸಿದರು. ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಸುಳ್ಳನ್ನೇ ಹತ್ತಾರು ಬಾರಿ ಹೇಳಿಕೊಂಡು ದೇಶಾದ್ಯಂತ ಪ್ರವಾಸ ಮಾಡಿದ್ದರು. ಈಗ ವಿಪಕ್ಷ ನಾಯಕನಾಗಿ ಹಳೇ ಚಾಳಿ ಮುಂದುವರೆಸಿದ್ದಾರೆ. ಸಂಸದರೂ ಆದ ಅವರು ತಮ್ಮ ಸ್ಥಾನದ ಘನತೆ ಎತ್ತಿ ಹಿಡಿಯುವ ಬದಲಾಗಿ ಆ ಸ್ಥಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ವಿಶ್ಲೇಷಿಸಿದರು.

ಇದನ್ನೂ ಓದಿ: ದಿನವೊಂದಕ್ಕೆ 1ಕೋಟಿ ಲೀ.ಹಾಲು ಉತ್ಪಾದನೆ: KMF ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು:ಸಿಎಂ

ನಿನ್ನೆ ಅವರು ತಮ್ಮ ಭಾಷಣದಲ್ಲಿ ಹಿಂದೂಗಳು ಹಿಂಸಾಚಾರ ಮತ್ತು ದ್ವೇಷದಲ್ಲಿ ಹಗಲಿರುಳು ನಿರತರು ಎಂಬ ಮಾತನ್ನು ಉಲ್ಲೇಖಿಸಿದ್ದಾರೆ. ಈ ಮಾತನ್ನು ಹೇಳುವ ಮೂಲಕ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಈ ದೇಶದ ಅಸಂಖ್ಯಾತ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಹಿಂದೂಗಳ ತೇಜೋವಧೆ ಮಾಡಿದ್ದಾರೆ. ಅಷ್ಟೇ ಸಾಲದೆಂದು ಅಗ್ನಿವೀರ್, ರೈತರ ಬಗ್ಗೆ, ಅಯೋಧ್ಯೆ ವಿಚಾರ ಮಾತ್ರವಲ್ಲದೆ, ಮೈಕ್ರೋಫೋನ್ ಬಗ್ಗೆ ಮಾತನಾಡಿದ್ದಾರೆ. ಇವೆಲ್ಲ ವಿಚಾರಗಳಲ್ಲಿ ಸುಳ್ಳು ಹೇಳಿಕೆ ನೀಡಿದ್ದಲ್ಲದೆ, ಹಿಂದೂಗಳ ತೇಜೋವಧೆ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು.

ಲೋಕಸಭಾ ಚುನಾವಣೆ ಬರುವ ಮುನ್ನ ಅವರು ವಿದೇಶಗಳಲ್ಲಿ ಪ್ರವಾಸ ಮಾಡಿ ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ಆರೋಪಿಸಿದ್ದರು. ಇದೀಗ ಸದನದಲ್ಲಿ ಹಿಂದೂಗಳಿಗೆ ಅವಮಾನ ಮಾಡಿದ್ದು ಅಕ್ಷಮ್ಯ ಅಪರಾಧ. 99 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಅಧಿಕಾರಕ್ಕೇನೂ ಬಂದಿಲ್ಲ. 100ರ ಗಡಿಯನ್ನು ದಾಟಲು ಆಗದ ಕಾಂಗ್ರೆಸ್ ಪಕ್ಷ, ಆ ಪಕ್ಷದ ನಾಯಕ ರಾಹುಲ್ ಗಾಂಧಿ, ವಿಪಕ್ಷ ನಾಯಕನಾಗಿ ಮನಸೋಇಚ್ಛೆ ಮಾತನಾಡಲು ಸದನವನ್ನು ಬಳಸಿದ್ದು ಖಂಡನೀಯ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES