ಬೆಂಗಳೂರು: ಇಂದಿನಿಂದ ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಗಾಳಿ-ಮಳೆಯ ತೀವ್ರತೆ ತಗ್ಗುವ ಸಾಧ್ಯತೆಯಿದೆ. ಮುಂದಿನ ಒಂದು ವಾರ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿಯ ಉಳಿದ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 30ರಿಂದ 40 ಕಿ.ಮೀ ವೇಗದಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಇಂದು ಕಾವೇರಿ, ಕಬಿನಿಗೆ ಸಿಎಂ ಸಿದ್ದರಾಮಯ್ಯ ಬಾಗಿನ
ಕರಾವಳಿ ಉದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆಗಳಿವೆ. ಗಂಟೆಗೆ 35ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯು ನಿರಂತರವಾಗಿ ಬೀಸುವ ಸಂಭವವಿದ್ದು, ವೇಗವು 40 ರಿಂದ 50 ಕಿ.ಮೀ ತಲುಪಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.