ದಾವಣಗೆರೆ: ಹಿಂದೂಗಳ ಹೆಸರಿಟ್ಟುಕೊಂಡು ದಾವಣಗೆರೆಯಲ್ಲಿ ಜೀವನ ಸಾಗಿಸುತ್ತಿದ್ದ ಪಾಕಿಸ್ತಾನ ಮೂಲದ ಆರು ಮಂದಿಯನ್ನು ಪೊಲೀಸರು ಅ. 2ರಂದು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವತಿಯಿಂದ ಬಂದಿದ್ದ ಈ ಮಾಹಿತಿಯ ಬೆನ್ನು ಬಿದ್ದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ದಾವಣಗೆರೆಯ ಕುಮಾರಸ್ವಾಮಿ ಬಡಾವಣೆಯಲ್ಲಿ ಜೀವನ ಸಾಗಿಸುತ್ತಿದ್ದ ಒಂದೇ ಕುಟುಂಬದ ಆರು ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎರಡು ದಿನಗಳ ಹಿಂದೆ, ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿಯ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದ ರಶೀದ್ ಸಿದ್ದಿಕಿ ಎಂಬ ಪಾಕಿಸ್ತಾನಿ ಪ್ರಜೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದರು. ಆತ ಶಂಕರ್ ಶರ್ಮಾ ಎಂಬ ಹೆಸರಿನಲ್ಲಿ ಸರ್ಕಾರಿ ದಾಖಲೆಗಳನ್ನು ಮಾಡಿಸಿಕೊಂಡಿದ್ದ. ಅದೇ ಹೆಸರಿನಲ್ಲಿದ್ದ ಭಾರತೀಯ ಪಾಸ್ ಪೋರ್ಟ್ ಕೂಡ ಆತನ ಬಳಿ ಇತ್ತು. ದಾಳಿಯ ವೇಳೆ ಈ ಎಲ್ಲಾ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅ. 2ರಂದು ದಾವಣಗೆರೆಯಲ್ಲಿ ಬಂಧನಕ್ಕೊಳಗಾಗಿರುವ ಹನೀಫ್ ನ ಮಾವ. ಈತ ನೀಡಿದ ಮಾಹಿತಿಯ ಮೇರೆಗೆ ದಾವಣಗೆರೆ ಪೊಲೀಸರು, ಅಲ್ಲಿನ ಕುಮಾರಸ್ವಾಮಿ ಬಡಾವಣೆಯಲ್ಲಿನ ಮನೆಯ ಮೇಲೆ ದಾಳಿ ನಡೆಸಿ ಅಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ.
ವಿಶೇಷ ತಂಡ ರಚನೆ :
ಬೆಂಗಳೂರಿನಲ್ಲಿ ಪಾಕಿಸ್ತಾನ ಅಕ್ರಮ ಪ್ರಜೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕುರಿತಂತೆ ಹೆಚ್ಚುವರಿ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಡಿವೈಎಸ್ ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಈ ತಂಡಗಳನ್ನು ರಚನೆ ಮಾಡಲಾಗಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕೃಷ್ಣಕುಮಾರ್, ಜಿಗಣಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಂಜುನಾಥ್, ಅತ್ತಿಬೆಲೆ ಪೊಲೀಸ್ ಇನ್ಸ್ ಪೆಕ್ಟರ್ ರಾಘವೇಂದ್ರ, ಸರ್ಜಾಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಅವರಿರುವ ತಂಡವನ್ನು ರಚನೆ ಮಾಡಲಾಗಿದೆ.