ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸಚಿವ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸೂಚಿಸಿದ್ದಾರೆ. ಇದರೊಂದಿಗೆ ಆಡಳಿತ ಪಕ್ಷ ಕಾಂಗ್ರೆಸ್ನ ಮೊದಲ ವಿಕೆಟ್ ಪತನವಾಗಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರು ಹಗರಣ ಸಂಬಂಧ ಗುರುವಾರ (ಮೇ 30) ರಂದು ಸಭೆ ನಡೆಸಿದ್ದರು. ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತೀರ್ಮಾನ ಕೈಗೊಂಡರು. ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ, ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ನಾಳೆ ಭವಾನಿ ರೇವಣ್ಣ ವಿಚಾರಣೆ: ಮನೆಯಿಂದಲೇ ವಿಚಾರಣೆ ನಡೆಸುವಂತೆ ಭವಾನಿ ಮನವಿ
ಬಿ. ನಾಗೇಂದ್ರ ಅವರು ರಾಜಿನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿಯೂ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆ ಸರ್ಕಾರದ ಮೇಲೆ ಒತ್ತಡ ಸೃಷ್ಠಿಯಾಗಿದ್ದು, ಇದರನ್ವಯ ನಡೆದ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.
ಏನಿದು ಘಟನೆ?
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.