ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ಎಣಿಕೆ ಕಾರ್ಯ ನಡೆಯುತ್ತಿದ್ದು ದೇಶಾದ್ಯಂತ ಅಂಕಿ ಅಂಶಗಳು ಕುತೂಹಲ ಮೂಡಿಸಿದೆ. ದಕ್ಷಿಣ ಭಾರತದಲ್ಲಿ ಪೂರ್ಣ ಪ್ರಮಾಣದಲ್ಲಿ ಅರಳಲು ಬಿಜೆಪಿಯ ತಂತ್ರ ಹಾಗೂ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಇಂಡಿಯಾ ಬಣದ ಕಸರತ್ತು ನಡೆಸಿದ್ದವು. ಕೇಂದ್ರಾಡಳಿತ ಪ್ರದೇಶದ ಪುದುಚೇರಿ ಸೇರಿ ಒಟ್ಟು 130 ಸ್ಥಾನಗಳಿರುವ ದಕ್ಷಿಣದಲ್ಲಿ ಎರಡೂ ಬಣಗಳು ನಡುವೆ ಆರಂಭಿಕ ಜಿದ್ದಾಜಿದ್ದಿನ ಹೋರಾಟ ನಡೆದಿದೆ.
ಮತ ಎಣಿಕೆ ಭರದಿಂದ ಸಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಎನ್ಡಿಎ ಆರಂಭಿಕ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಆಂಧ್ರ ಪ್ರದೇಶದಲ್ಲಿ ಟಿಡಿಪಿಯೊಂದಿಗಿನ ಮೈತ್ರಿಯು ಬಿಜೆಪಿಗೆ ನೆರವಾಗಿದೆ. ಕೇರಳದ ತ್ರಿಶೂರ್ ಹಾಗೂ ತಿರುವನಂತಪುರದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಈ ರಾಜ್ಯದಲ್ಲಿ ಕಮಲ ಅರಳುವ ತವಕದಲ್ಲಿದೆ. ತೆಲಂಗಾಣದಲ್ಲಿ ಬಿಆರ್ಎಸ್ ಆರಂಭಿಕ ಹಿನ್ನಡೆ ಅನುಭವಿಸಿದೆ. ತಮಿಳುನಾಡಿನಲ್ಲಿ ಡಿಎಂಕೆ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ: Loksabha Election 2024: ಫಲಿತಾಂಶದ ಕ್ಷಣಕ್ಷಣದ ಮಾಹಿತಿ
ತಿರುವನಂತಪುರ ಕ್ಷೇತ್ರದಲ್ಲಿ ಮೂರು ಬಾರಿ ಸಂಸದರಾಗಿರುವ ಶಶಿ ತರೂರ್ ವಿರುದ್ಧ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸ್ಪರ್ಧಿಸಿದ್ದು ಆರಂಭಿಕ 1,600 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅಲಪುಳದಲ್ಲಿ ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಅವರು 13 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಲೋಕಸಭೆಯ 543 ಕ್ಷೇತ್ರಗಳಲ್ಲಿ ಈ ಬಾರಿ 400 ಕ್ಷೇತ್ರಗಳನ್ನು ಗೆಲ್ಲುವ ತವಕದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಇದ್ದು, ಆರಂಭಿಕ ಮುನ್ನಡೆ ಸಾಧಿಸಿದೆ. ಕಳೆದ ಬಾರಿ ಪಕ್ಷವು ಕರ್ನಾಟಕದಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ತೆಲಂಗಾಣದಲ್ಲಿ 4 ಸ್ಥಾನಗಳನ್ನು ಪಡೆದಿತ್ತು. ಆದರೆ ಆಂಧ್ರಪ್ರದೇಶ, ಕೇರಳ ಹಾಗೂ ತಮಿಳುನಾಡಿನಲ್ಲಿ ಶೂನ್ಯ ಸಂಪಾದಿಸಿತ್ತು.
ಜೂನ್ 1ರಂದು ವಿವಿಧ ಸಂಸ್ಥೆಗಳು ಪ್ರಕಟಿಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಆಡಳಿತಾರೂಢ ಪಕ್ಷ ಕಾಂಗ್ರೆಸ್ ಇದ್ದರೂ, ಬಿಜೆಪಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಲಾಗಿತ್ತು. ಕೇರಳದಲ್ಲಿ ಬಿಜೆಪಿ 2 ಸ್ಥಾನಗಳನ್ನು ಹಾಗೂ ತಮಿಳುನಾಡಿನಲ್ಲಿ 4 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ್ದವು.
ಮತ ಎಣಿಕೆ ಪ್ರಗತಿಯಲ್ಲಿದ್ದು, ಅಂತಿಮವಾಗಿ ಎಷ್ಟು ಕ್ಷೇತ್ರಗಳು ಈ ಬಣಗಳಿವೆ ದೊರಕಲಿವೆ ಎಂಬುದು ತಿಳಿಯಲಿದೆ.