ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿ ಸ್ಥಾನದಿಂದ ತೆರವಾಗಲಿರುವ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನದ ಅಭ್ಯರ್ಥಿಯ ವಿಚಾರವಾಗಿ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದು ಸಾರ್ವಜನಿಕ ವಲಯದಲ್ಲಿ ಭಾರಿ ಸದ್ದು ಮಾಡಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಿ.ಪಿ. ಯೋಗೇಶ್ವರ್, ಮುಂಬರುವ ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದರು. ಆದರೆ, ಅವರು ಹೇಳಿರುವ ಅಚ್ಚರಿ ಅಭ್ಯರ್ಥಿ, ಚಿತ್ರನಟ ಸದ್ಯ ಕೊಲೆ ಕೇಸಿನಲ್ಲಿ ಜೈಲು ಪಾಲಾಗಿದ್ದಾನೆ. ಕಾಂಗ್ರೆಸ್ ನಾಯಕರ ಸಖ್ಯ ಹೊಂದಿದ್ದ ಈತ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಹೆಚ್ಚು ಪ್ರಚಾರ ಮಾಡಿದ್ದರು. ಆತ ಈಗ ಕೊಲೆ ಕೇಸಿನಲ್ಲಿ ಜೈಲು ಪಾಲಾಗಿದ್ದಾನೆ. ಆತನೇ ಡಿ.ಕೆ.ಸುರೇಶ್ ಹೇಳಿರುವ ಅಚ್ಚರಿ ಅಭ್ಯರ್ಥಿ ಎಂದು ಹೊಸ ಟ್ವಿಸ್ಟ್ ನೀಡಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ ರನ್ನು ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಸಲು ಸಾಧ್ಯವಿಲ್ಲ: ಸಚಿವ ಎಂ.ಬಿ ಪಾಟೀಲ್
ಸದ್ಯ ಜೈಲುಪಾಲಾಗಿರುವ ವ್ಯಕ್ತಿಯನ್ನು ಡಿಕೆ ಬ್ರದರ್ಸ್ ಕಾಂಗ್ರೆಸ್ಗೆ ಸೇರಿಸಿಕೊಂಡು ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಮಾಡಲು ಹೊರಟಿದ್ದರು. ಆ ವ್ಯಕ್ತಿ ಯಾರೆಂದು ನೀವೇ ಊಹಿಸಿಕೊಳ್ಳಿ ಎಂದು ಹೇಳುವ ಮೂಲಕ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ತಲ್ಲಣವನ್ನು ಸೃಷ್ಟಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆಯಲಿದೆ ಎಂದು ಕಾದುನೋಡಬೇಕಿದೆ.