ಚಾಮರಾಜನಗರ: ಅಂತ್ಯಕ್ರಿಯೆಗೆ ತೆರಳಿದ್ದ 42 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥರಿಗೆ ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ 19 ಮಂದಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಬಸವಾಪುರ ಗ್ರಾಮದ ವೃದ್ಧ ಮಹಾದೇವಯ್ಯ ಎಂಬುವವರ ಅಂತ್ಯಕ್ರಿಯೆ ನಡೆಸಲು ಹೋದ ವೇಳೆ ಹೆಜ್ಜೇನು ದಾಳಿ ಮಾಡಿದೆ. ಸ್ಮಶಾನದಲ್ಲಿ ಮೃತ ದೇಹಕ್ಕೆ ಬೆಂಕಿ ಹಚ್ಚುತ್ತಿದ್ದಂತೆ ಹೆಜ್ಜೇನು ದಾಳಿ ಮಾಡಿದೆ. ಅಂತ್ಯಕ್ರಿಯೆ ನಡೆಸುವ ವೇಳೆ ದಟ್ಟ ಹೊಗೆ ಆವರಿಸಿತ್ತು. ಹೊಗೆ ತಾಳತಾರದೆ ಮರದಲ್ಲಿದ್ದ ಹೆಜ್ಜೇನುಗಳು ಏಕಾಏಕಿ ದಾಳಿ ಮಾಡಿವೆ.
ಇದನ್ನು ಓದಿ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗಾಗಿ ಪತ್ರ ಚಳವಳಿ!
ಹೆಚ್ಚೇನು ದಾಳಿಗೆ ಒಳಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಭೇಟಿ ಮಾಡಿದ್ದಾರೆ. ಪರಿಶೀಲನೆ ನಡೆಸಿದ ಅವರು 19 ಮಂದಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಹೆಚ್ಚೇನಿನ ಮುಳ್ಳುಗಳನ್ನು ಕಡಿತಕ್ಕೊಳಗಾದವರ ಮುಖ ಹಾಗೂ ಕೈ- ಕಾಲುಗಳಿಂದ ಸಂಪೂರ್ಣವಾಗಿ ತೆಗೆಯಲಾಗಿದೆ. ಎಲ್ಲರೂ ಆರೋಗ್ಯವಾಗಿದ್ದು, ಚೇತರಿಕೆ ಕಾಣುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಇನ್ನು ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.