ಚೈನೈ: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಆರೋಪಿಗಳು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮುದ್ರಾಸ್ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಅಸಂಬದ್ಧ ಹೇಳಿಕೆ ನೀಡುವುದು ಸರಿಯಲ್ಲ ಎಂದು ಮುದ್ರಾಸ್ ಹೈಕೋರ್ಟ್ ಹೇಳಿದೆ.
ಬಾಂಬರ್ಗಳು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎನ್ನುವ ಹೇಳಿಕೆ ವಿರುದ್ಧ ಸ್ಥಳೀಯ ನಿವಾಸಿಯೊಬ್ಬರು ಮಧುರೈ ಸಿಟಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು. ಎಫ್ಐಆರ್ ರದ್ದು ಕೋರಿ ಶೋಭಾ ಕರಂದ್ಲಾಜೆ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಿ.ಜಯಚಂದ್ರನ್ ಸರಣಿ ಪ್ರಶ್ನೆಗಳ ಮೂಲಕ ಶೋಭಾ ಕರಂದ್ಲಾಜೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: T20 WC 2024 : ಸಹಾಯಕ ಸಿಬ್ಬಂದಿಗಳಿಗೆ ತನ್ನ ಪಾಲಿನ 5 ಕೋಟಿ ರೂ.ಕೊಡಲು ಮುಂದಾದ ಹಿಟ್ಮ್ಯಾನ್
ಬಾಂಬರ್ಗಳಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿದೆ ಎಂದು ಸಾರ್ವಜನಿಕವಾಗಿ ಏಕೆ ಹೇಳಿದ್ದೀರಿ? ಎನ್ಐಎ ಚೆನ್ನೈನಲ್ಲಿ ಶೋಧ ನಡೆಸುವ ಮುನ್ನವೇ ನೀವು ಹೇಳಿಕೆ ನೀಡಿದ್ದೀರಿ. ಇದರರ್ಥ ನೀವು ಸತ್ಯಗಳ ಬಗ್ಗೆ ತಿಳಿದಿರುತ್ತೀರಿ. ತರಬೇತಿ ಪಡೆದ ವ್ಯಕ್ತಿಗಳು ಯಾರು? ಅವರಿಗೆ ತರಬೇತಿ ನೀಡಿದವರು ಮತ್ತು ಅವರು ಏನು ಮಾಡಿದ್ದಾರೆಂದು ನಿಮಗೆ ತಿಳಿದಿದೆ. ಅಪರಾಧದ ಬಗ್ಗೆ ನಿಮಗೆ ಸ್ವಲ್ಪ ಮಾಹಿತಿ ಸಿಕ್ಕಿದ್ದರೆ, ನೀವು ಅದನ್ನು ಪೊಲೀಸರಿಗೆ ಬಹಿರಂಗಪಡಿಸಬೇಕು. ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ಸಚಿವರು ಅದನ್ನು ಮಾಡಿಲ್ಲ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.